59
ಉಡುಪಿ: ಷೇರು ಮಾರುಕಟ್ಟೆಯಲ್ಲಿ ಅಧಿಕ ಲಾಭ ಗಳಿಸುವ ಆಮಿಷಕ್ಕೆ ಒಳಗಾದ ವ್ಯಕ್ತಿಯೊಬ್ಬರು ಬರೋಬ್ಬರಿ 71.74 ಲಕ್ಷ ರೂಪಾಯಿಗಳನ್ನು ಕಳೆದುಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ. ಪಾಂಗಾಳದ ನಿವಾಸಿ, ಸಿಂಗಾಪುರದಲ್ಲಿ ಅಕೌಂಟೆಂಟ್ ಆಗಿ ಕಾರ್ಯನಿರ್ವಹಿಸುತ್ತಿರುವ ಮಹೇಶ ಶೆಟ್ಟಿಗಾರ್ ವಂಚನೆಗೊಳಗಾದ ದುರ್ದೈವಿ.
ಜನವರಿ 3ರಂದು ‘ಆಮ್ಮಿ ಫೆಕ್ಸ್ ಪ್ರೋ’ ಹೆಸರಿನ ವಾಟ್ಸ್ಆ್ಯಪ್ ಮೂಲಕ ಅಪರಿಚಿತ ವ್ಯಕ್ತಿಯೊಬ್ಬ ಸಂಪರ್ಕಿಸಿ, ಹಣ ಹೂಡಿಕೆ ಮಾಡಿದರೆ ಭಾರಿ ಲಾಭ ನೀಡುವುದಾಗಿ ನಂಬಿಸಿದ್ದಾನೆ. ಇದನ್ನು ನೈಜ ಎಂದು ಭಾವಿಸಿದ ಮಹೇಶ ಅವರು ಜನವರಿ 4ರಿಂದ 18ರ ಅವಧಿಯಲ್ಲಿ ಹಂತ ಹಂತವಾಗಿ ಒಟ್ಟು 71,74,000 ರೂ.ಗಳನ್ನು ಆರೋಪಿಯ ವಿವಿಧ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿದ್ದಾರೆ. ಬಳಿಕ ಹಣ ಹಿಂಪಡೆಯಲು ಸಾಧ್ಯವಾಗದಿದ್ದಾಗ ವಂಚನೆ ಬೆಳಕಿಗೆ ಬಂದಿದೆ. ಈ ಕುರಿತು ಉಡುಪಿ ಸೆನ್ (CEN) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.