ನವದೆಹಲಿ: ಸಂಸತ್ತಿನ ಪ್ರಸಕ್ತ ವರ್ಷದ ಬಜೆಟ್ ಅಧಿವೇಶನವು ಇಂದಿನಿಂದ (ಬುಧವಾರ) ಆರಂಭವಾಗಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡುವ ಮೂಲಕ ಅಧಿಕೃತ ಚಾಲನೆ ನೀಡಲಿದ್ದಾರೆ. ರಾಷ್ಟ್ರಪತಿಗಳ ಭಾಷಣದೊಂದಿಗೆ ಸಂಸತ್ತಿನ ಉಭಯ ಸದನಗಳ ಕಲಾಪಗಳು ಆರಂಭವಾಗಲಿದ್ದು, ದೇಶದ ಆರ್ಥಿಕ ಪ್ರಗತಿ ಮತ್ತು ಸರ್ಕಾರದ ಮುಂದಿನ ಯೋಜನೆಗಳ ಮೇಲೆ ಈ ಅಧಿವೇಶನವು ಬೆಳಕು ಚೆಲ್ಲಲಿದೆ.
ಈ ಬಾರಿಯ ಅಧಿವೇಶನವು ಎರಡು ಹಂತಗಳಲ್ಲಿ ನಡೆಯಲಿದ್ದು, ಒಟ್ಟು 30 ದಿನಗಳ ಕಾಲ ಕಲಾಪಗಳು ಜರುಗಲಿವೆ. ಮೊದಲ ಹಂತದ ಅಧಿವೇಶನವು ಜನವರಿ 28 ರಿಂದ ಫೆಬ್ರವರಿ 13 ರವರೆಗೆ ನಡೆಯಲಿದ್ದು, ನಂತರ ಮಧ್ಯಂತರ ವಿರಾಮ ಇರಲಿದೆ. ದ್ವಿತೀಯ ಹಂತದ ಕಲಾಪಗಳು ಮಾರ್ಚ್ 9 ರಿಂದ ಆರಂಭವಾಗಿ ಏಪ್ರಿಲ್ 2 ರಂದು ಮುಕ್ತಾಯಗೊಳ್ಳಲಿವೆ. ಅಧಿವೇಶನ ಸುಗಮವಾಗಿ ನಡೆಯುವಂತೆ ನೋಡಿಕೊಳ್ಳಲು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ಈಗಾಗಲೇ ಸರ್ವಪಕ್ಷಗಳ ಸಭೆ ನಡೆಸಿ ಚರ್ಚಿಸಲಾಗಿದೆ.
ಅಧಿವೇಶನದ ಪ್ರಮುಖ ಆಕರ್ಷಣೆಯಾದ ಕೇಂದ್ರ ಬಜೆಟ್ ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1 ರಂದು ಮಂಡಿಸಲಿದ್ದಾರೆ. ದೇಶದ ಆರ್ಥಿಕ ಸ್ಥಿತಿಗತಿಯನ್ನು ನಿರ್ಧರಿಸುವ ಈ ಬಜೆಟ್ ಮೇಲೆ ಎಲ್ಲರ ಕಣ್ಣು ನೆಟ್ಟಿದ್ದು, ಜನಸಾಮಾನ್ಯರ ನಿರೀಕ್ಷೆಗಳು ಹೆಚ್ಚಿವೆ. ಈ ಅಧಿವೇಶನದಲ್ಲಿ ವಿವಿಧ ಮಸೂದೆಗಳ ಮಂಡನೆ ಮತ್ತು ಸಾರ್ವಜನಿಕ ಹಿತಾಸಕ್ತಿಯ ವಿಷಯಗಳ ಕುರಿತು ಗಹನವಾದ ಚರ್ಚೆಗಳು ನಡೆಯುವ ಸಾಧ್ಯತೆಯಿದೆ