ಕರಾವಳಿಯಲ್ಲಿ ಕಾಂಗ್ರೆಸ್ ವಿರುದ್ಧ ಮುಸ್ಲಿಂ ಮುಖಂಡರ ಅಸಮಾಧಾನ ಸ್ಫೋಟಗೊಂಡಿದ್ದು, ಪುತ್ತೂರಿನ ನೂತನ ಕಾಂಗ್ರೆಸ್ ಭವನದ ಶಿಲಾನ್ಯಾಸ ಕಾರ್ಯಕ್ರಮವು ಈಗ ವಿವಾದಕ್ಕೆ ಈಡಾಗಿದೆ. ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಪ್ರಮುಖ ಮುಸ್ಲಿಂ ನಾಯಕರ ಹೆಸರುಗಳನ್ನು ಕೈಬಿಟ್ಟಿರುವುದು ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭಾಗವಹಿಸುತ್ತಿರುವ ಈ ಸಮಾರಂಭದಲ್ಲಿ ಸಮುದಾಯವನ್ನು ಕಡೆಗಣಿಸಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗಿದೆ.
ಈ ಹಿಂದೆ ಬಂಟ್ವಾಳದ ರೆಹಮಾನ್ ಹತ್ಯೆ ಸಂದರ್ಭದಲ್ಲೂ ಮುಸ್ಲಿಂ ಕಾರ್ಯಕರ್ತರು ಕಾಂಗ್ರೆಸ್ ವಿರುದ್ಧ ತಿರುಗಿಬಿದ್ದಿದ್ದರು. ಇದೀಗ ಪುತ್ತೂರಿನಲ್ಲಿ ಪ್ರಚಾರ ಸಮಿತಿ ಅಧ್ಯಕ್ಷ ಮಹಮ್ಮದ್ ಆಲಿ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ನವಾಝ್ ಸೇರಿದಂತೆ ಹಲವು ಹಿರಿಯ ನಾಯಕರ ಹೆಸರುಗಳನ್ನು ಆಹ್ವಾನ ಪತ್ರಿಕೆಯಲ್ಲಿ ಹಾಕದ ಹಿನ್ನೆಲೆ ‘ಕೈ’ ನಾಯಕರಿಗೆ ಭಾರೀ ಮುಜುಗರ ಉಂಟಾಗಿದೆ. ಪ್ರತಿಭಟನೆಯ ಬಿಸಿಯ ಬೆನ್ನಲ್ಲೇ ತೇಪೆ ಹಚ್ಚಲು ಮುಂದಾದ ಜಿಲ್ಲಾ ಕಾಂಗ್ರೆಸ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ ಅವರ ಹೆಸರು ಸೇರಿಸಿ ಆಹ್ವಾನ ಪತ್ರಿಕೆಯನ್ನು ಮರುಮುದ್ರಣ ಮಾಡಿದೆ.
ಆದರೂ ಅಸಮಾಧಾನ ತಣ್ಣಗಾಗಿಲ್ಲ. ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಾಹುಲ್ ಹಾಗೂ ಎಂ.ಎಸ್. ಮಹಮ್ಮದ್ ಸೇರಿದಂತೆ ಹಲವು ಪ್ರಮುಖರನ್ನು ನಿರ್ಲಕ್ಷಿಸಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಮುಖಂಡರು, ಇಂದಿನ ಕಾರ್ಯಕ್ರಮದಿಂದ ದೂರ ಉಳಿಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಚುನಾವಣೆ ಹತ್ತಿರವಿರುವಾಗ ಕರಾವಳಿ ಭಾಗದಲ್ಲಿ ಮುಸ್ಲಿಂ ನಾಯಕರ ಈ ಅಸಹಕಾರವು ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.