ಪುತ್ತೂರು ಜಾತ್ರೋತ್ಸವಕ್ಕೆ ಧ್ವಜಾರೋಹಣದೊಂದಿಗೆ ಭವ್ಯ ಚಾಲನೆ
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಏಪ್ರಿಲ್ 10ರಿಂದ ಆರಂಭಗೊಳ್ಳುವ ವಾರ್ಷಿಕ ಜಾತ್ರೋತ್ಸವಕ್ಕೆ ಶುಭಾರಂಭವಾಗಿ, ದೇವಾಲಯದಲ್ಲಿ ಧ್ವಜಾರೋಹಣ ಕಾರ್ಯಕ್ರಮ ಭಕ್ತಿಭಾವದಿಂದ ನೆರವೇರಿತು.

ಬೆಳಿಗ್ಗೆ 9.20ರ ನಂತರದ ಶುಭ ವೃಷಭ ಲಗ್ನದಲ್ಲಿ, ಸುಮಾರು 10.38ರ ವೇಳೆಗೆ ದೇವಾಲಯದ ತಂತ್ರಿ ಬ್ರಹ್ಮಶ್ರೀ ಕುಂಟಾರು ರವೀಶ್ ತಂತ್ರಿಯವರ ನೇತೃತ್ವದಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು. ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನಡೆದ ಈ ಕಾರ್ಯಕ್ರಮದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ್ ಭಟ್ ಪಂಜಿಗುಡ್ಡೆ ಹಾಗೂ ಸಮಿತಿ ಸದಸ್ಯರು ಭಾಗವಹಿಸಿದರು.


ಜಾತ್ರೋತ್ಸವದ ಆರಂಭದ ಈ ಮಹತ್ವದ ಕ್ಷಣವನ್ನು ಸಾಕ್ಷಿಯಾಗಿ ಅಪಾರ ಸಂಖ್ಯೆಯ ಭಕ್ತರು ಹಾಜರಾಗಿ, ವಿಶೇಷ ಪೂಜೆ-ಪುನಸ್ಕಾರಗಳಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾದರು. ಮುಂದಿನ ದಿನಗಳಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಸಾಂಸ್ಕೃತಿಕ ಆಚರಣೆಗಳು ಭಕ್ತರ ಸಮ್ಮುಖದಲ್ಲಿ ನಡೆಯಲಿವೆ.