ನಟ ದರ್ಶನ್ಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್: ಜಾಮೀನು ಅರ್ಜಿ ತಿರಸ್ಕಾರ!
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ತೂಗುದೀಪಗೆ ಮತ್ತೊಮ್ಮೆ ಭಾರೀ ಹಿನ್ನಡೆಯಾಗಿದೆ. ಪ್ರಕರಣದ ವಿಚಾರಣೆಯಲ್ಲಿ ಸಾಕ್ಷಿಗಳ ಪರಿಶೀಲನೆ ವಿಳಂಬವಾಗುತ್ತಿದೆ ಎಂಬ ಆಧಾರದ ಮೇಲೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.
ಇದರೊಂದಿಗೆ, ಮುಂದಿನ ಒಂದು ವರ್ಷದವರೆಗೆ ಮತ್ತೆ ಜಾಮೀನು ಅರ್ಜಿ ಸಲ್ಲಿಸಲು ಅವಕಾಶವಿಲ್ಲ ಎಂದು ಕೋರ್ಟ್ ಸ್ಪಷ್ಟಪಡಿಸಿದ್ದು, ದರ್ಶನ್ ಅಭಿಮಾನಿಗಳಿಗೆ ಇದು ದೊಡ್ಡ ಆಘಾತವಾಗಿದೆ.
ಸುದೀರ್ಘ ಜೈಲು ವಾಸದಿಂದ ತಮ್ಮ ಸಿನಿಮಾ ವೃತ್ತಿಜೀವನಕ್ಕೆ ಭಾರೀ ಹೊಡೆತ ಬೀಳುತ್ತಿದೆ ಎಂದು ದರ್ಶನ್ ತಮ್ಮ ಮನವಿಯಲ್ಲಿ ಉಲ್ಲೇಖಿಸಿದ್ದರು. “ಪ್ರತಿ ವರ್ಷ 2 ರಿಂದ 3 ಸಿನಿಮಾಗಳಲ್ಲಿ ನಟಿಸುತ್ತಿದ್ದೆ. ಈಗಾಗಲೇ ಕೆವಿಎನ್ ಪ್ರೊಡಕ್ಷನ್ಸ್ ಹಾಗೂ ಮೀಡಿಯಾ ಹೌಸ್ ಸ್ಟೂಡಿಯೋಸ್ನಂತಹ ದೊಡ್ಡ ಬ್ಯಾನರ್ಗಳ ಸಿನಿಮಾಗಳಿಗೆ ಸಹಿ ಮಾಡಿದ್ದೇನೆ. ನಿರ್ಮಾಪಕರು ಸುಮಾರು 6 ಕೋಟಿ ರೂಪಾಯಿ ಹೂಡಿಕೆ ಮಾಡಿದ್ದಾರೆ. ಜೈಲುವಾಸದಿಂದ ನನ್ನ ಸಿನಿ ಭವಿಷ್ಯಕ್ಕೆ ಮರಣಘಂಟೆಯಾಗಲಿದೆ” ಎಂದು ಮನವಿಯಲ್ಲಿ ವಿವರಿಸಿದ್ದರು.
ಆದರೆ, ಈ ವಾದಗಳನ್ನು ಪರಿಗಣಿಸದ ಸುಪ್ರೀಂ ಕೋರ್ಟ್ ಜಾಮೀನು ನೀಡಲು ನಿರಾಕರಿಸಿದೆ. ಪ್ರಕರಣದ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು ಕೋರ್ಟ್ ಈ ತೀರ್ಮಾನ ಕೈಗೊಂಡಿದೆ ಎಂದು ತಿಳಿದುಬಂದಿದೆ.

ಈ ಬೆಳವಣಿಗೆಯಿಂದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಸಿನಿಮಾ ವೃತ್ತಿಜೀವನದ ಮೇಲೆ ಗಂಭೀರ ಪರಿಣಾಮ ಬೀಳುವ ಸಾಧ್ಯತೆ ಇದೆ. ಈಗಾಗಲೇ ಘೋಷಣೆಯಾಗಿದ್ದ ಕೆಲವು ದೊಡ್ಡ ಬಜೆಟ್ ಸಿನಿಮಾಗಳು ಕೂಡ ಅನಿಶ್ಚಿತತೆಯಲ್ಲಿದ್ದು, 2028ರವರೆಗೂ ದರ್ಶನ್ ಅಭಿನಯದ ಹೊಸ ಸಿನಿಮಾ ಬಿಡುಗಡೆಯಾಗುವ ಸಾಧ್ಯತೆ ಕ್ಷೀಣಿಸಿದೆ ಎನ್ನಲಾಗುತ್ತಿದೆ.
ದರ್ಶನ್ ಪ್ರಕರಣ ಇದೀಗ ರಾಜ್ಯಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದ್ದು, ಮುಂದಿನ ನ್ಯಾಯಾಂಗ ಪ್ರಕ್ರಿಯೆಗಳತ್ತ ಎಲ್ಲರ ಗಮನ ನೆಟ್ಟಿದೆ.
